Continuous efforts for the comprehensive development of the sector – B.Y. Raghavendra
ಪತ್ರಿಕಾ ಭವನದಲ್ಲಿ ನಡೆದ ಸಂವಾದದಲ್ಲಿ ಸಂಸದರಿಂದ ಅಭಿಪ್ರಾಯ ವ್ಯಕ್ತ
Shivamogga : ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಸಂಕಲ್ಪದೊಂದಿಗೆ ನಿರಂತರ ಶ್ರಮ ವಹಿಸಿದ್ದೇನೆ ಹಾಗೂ ಅದರ ಬಹುಪಾಲು ಫಲಿತಾಂಶವೂ ಕಂಡುಬಂದಿದೆ ಎಂದು ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಹೇಳಿದರು.


ನಗರದ ಪತ್ರಿಕಾ ಭವನದಲ್ಲಿ ಪ್ರೆಸ್ ಟ್ರಸ್ಟ್ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾನು ನಾಲ್ಕನೇ ಬಾರಿ ಸಂಸದನಾಗಿ ಆಯ್ಕೆಯಾಗಿದ್ದು ಎಲ್ಲರ ಸಹಕಾರದ ಫಲ. ಪತ್ರಕರ್ತರ ಮಾರ್ಗದರ್ಶನವೂ ನನ್ನ ಸಾರ್ವಜನಿಕ ಬದುಕಿನಲ್ಲಿ ಮಹತ್ವದ್ದಾಗಿದೆ. ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಹಾಗೂ ವಿವಿಧ ಯೋಜನೆಗಳ ಅಡಿಯಲ್ಲಿ ಬೈಂದೂರು ಸೇರಿದಂತೆ ಇಡೀ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಸಾಕಷ್ಟು ಕೆಲಸ ಆಗಿದೆ, ಇನ್ನೂ ಆಗಬೇಕಾದದ್ದು ಉಳಿದಿದೆ. ಎಲ್ಲರ ಸಹಕಾರದೊಂದಿಗೆ ಮುಂದುವರೆಯುತ್ತೇನೆ” ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸ್ವಚ್ಛ ಭಾರತ್ ಅಭಿಯಾನದಡಿ ಪ್ರತೀ ಹಳ್ಳಿಗೂ ಶೌಚಾಲಯ, ಸ್ವಚ್ಛತೆ, ಅನಿಲ ಸಂಪರ್ಕ, ಕುಡಿಯುವ ನೀರಿನ ವ್ಯವಸ್ಥೆ, ರಾಷ್ಟ್ರೀಯ ಹೆದ್ದಾರಿ, ರಸ್ತೆ, ಮನೆ, ಮೊಬೈಲ್ ಟವರ್ಗಳು ಹಾಗೂ ರೈಲ್ವೆ ಅಭಿವೃದ್ಧಿ ಸೇರಿದಂತೆ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲೂ ಈ ಯೋಜನೆಗಳಡಿ ಹಲವು ಅಭಿವೃದ್ಧಿ ಕಾರ್ಯಗಳು ಪೂರ್ಣಗೊಂಡಿವೆ ಎಂದರು.

ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು ಸೇವೆ ಆರಂಭವಾಗುವ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ನಿರೀಕ್ಷೆಯಿದೆ. ಆದರೆ, ಈ ಸೇವೆ ಆರಂಭವಾಗಲು ಕೋಟೆಗಂಗೂರು ರೈಲ್ವೆ ಟರ್ಮಿನಲ್ ಕಾಮಗಾರಿ ಪೂರ್ಣಗೊಳ್ಳುವುದು ಅತ್ಯಗತ್ಯವಾಗಿದೆ. ವಂದೇ ಭಾರತ್ ರೈಲಿಗೆ ಅಗತ್ಯವಿರುವ ಸ್ವಚ್ಛತೆ, ನಿರ್ವಹಣೆ ಹಾಗೂ ಪ್ಲಾಟ್ಫಾರ್ಮ್ ಸೌಲಭ್ಯಗಳು ಅಲ್ಲಿ ಲಭ್ಯವಿರುವುದರಿಂದ, ತಾಂತ್ರಿಕ ಕಾರಣಗಳಿಂದಾಗಿ ಈ ಸೇವೆ ಆರಂಭಕ್ಕೆ ಸ್ವಲ್ಪ ವಿಳಂಬವಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.








