ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕಿನ ಶೀರಿಹಳ್ಳಿ ಗ್ರಾಮದ ಬಳಿ ಇಂದು ಬೆಳಿಗ್ಗೆ ಖಾಸಗಿ ಬಸ್ಸೊಂದು ಚಕ್ರ ಕಟ್ ಆಗಿ ಅಡಕೆ ತೋಟಕ್ಕೆ ನುಗ್ಗಿದ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಶಾಲಾ ವಿದ್ಯಾರ್ಥಿಗಳು ಹಾಗೂ ಇತರ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.


ಚಿಕ್ಕೇರೂರ್ನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 18 B 2299) ಹೆಸರಿನ ಖಾಸಗಿ ಬಸ್ ಶೀರಿಹಳ್ಳಿ ಬಳಿ ಸಂಚರಿಸುವಾಗ ಈ ಅವಘಡ ನಡೆದಿದೆ. ಬಸ್ಸಿನ ಹಿಂಬದಿಯ ಚಕ್ರದ ಆಕ್ಸಲ್ ಹಠಾತ್ತನೆ ಕಟ್ ಆಗಿದ್ದೇ ಈ ಘಟನೆಗೆ ಕಾರಣ ಎನ್ನಲಾಗಿದೆ.

ತೆಂಗಿನ ಮರವೇ ಜೀವದಾನಿ:ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆಯ ಪಕ್ಕದ ಅಡಕೆ ತೋಟಕ್ಕೆ ನುಗ್ಗಿ ಅಲ್ಲಿದ್ದ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಒಂದು ವೇಳೆ ಮರಕ್ಕೆ ಡಿಕ್ಕಿ ಹೊಡೆಯದಿದ್ದರೆ ಬಸ್ ಪಲ್ಟಿಯಾಗಿ ದೊಡ್ಡ ಮಟ್ಟದ ಪ್ರಾಣಹಾನಿ ಸಂಭವಿಸುವ ಸಾಧ್ಯತೆಯಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಪ್ರಯಾಣಿಕರ ಸ್ಥಿತಿ: ಬಸ್ಸಿನಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಇದರಲ್ಲಿ ಶಾಲಾ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಅಪಘಾತದ ರಭಸಕ್ಕೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಸೇರಿದ ಸಾರ್ವಜನಿಕರು ಪ್ರಯಾಣಿಕರ ರಕ್ಷಣೆಗೆ ನೆರವಾಗಿದ್ದಾರೆ.








